Showing posts with label ಹಿಮಾಚಲ್ ಪ್ರದೇಶ್. Show all posts
Showing posts with label ಹಿಮಾಚಲ್ ಪ್ರದೇಶ್. Show all posts

Friday, June 5, 2009

ಹಿಮಾಚಲ ಪರ್ಯಟನೆ - ಬೈಜನಾಥ್



ಹಿಮಾಚಲದ ಕಾಂಗ್ರ ಗುಡ್ಡಗಾಡಿನ ತಪ್ಪಲಲ್ಲಿರುವ ಊರು - ಬೈಜನಾಥ್. ಧರ್ಮಶಾಲಾದಿಂದ ಪೂರ್ವಕ್ಕಿರುವ ಈ ಊರು ಬಿನ್ವಾ ಎಂಬ ನದಿಯ ತಟದಲ್ಲಿದೆ. ಬಿಯಾಸ್ ನದಿಯ ಉಪನದಿ ಈ ಬಿನ್ವಾ.
ಊರಿನ ಹೆಸರೇ ಸೂಚಿಸುವಂತೆ ಇಲ್ಲಿ ಬೈಜನಾಥ್ ದೇವಾಲಯವಿದೆ. ಬೈಜನಾಥನೆಂದರೆ ವೈದ್ಯನಾಥ, ಶಿವ.
ಈ ಸ್ಥಳದಲ್ಲಿ ಶಾರದಾ ಲಿಪಿಯಲ್ಲಿ ಬರೆದ ಶಿಲಾಶಾಸನಗಳು ದೊರೆಕಿವೆ. ಈ ಶಿಲಾಶಾಸನಗಳಿಂದ ಈ ಊರಿನ ಹಳೆಯ ಹೆಸರು ’ಕೀರಗ್ರಾಮ’ ಎಂದೂ, ಬಿನ್ವಾ ನದಿಯ ಹಳೆಯ ಹೆಸರು ’ಬಿಂದುಕಾ’ ಎಂದೂ ತಿಳಿದುಬರುತ್ತದೆ. ಈ ಶಿಲಾಶಾಸನಗಳಿಂದ, ಈ ದೇಗುಲವನ್ನು ಕ್ರಿ.ಶ. ೧೨೦೪ರಲ್ಲಿ ಕಟ್ಟಿದರೆಂದೂ ಹೇಳುತ್ತಾರೆ.
ಉತ್ತರ ಭಾರತದ ನಾಗರ ಶೈಲಿಯಲ್ಲಿ ಕಟ್ಟಿರುವ ಸುಂದರ ದೇಗುಲ - ಬೈಜನಾಥ್. ಇಲ್ಲಿ, ವೈದ್ಯನಾಥನ ಎದುರು(ಲಿಂಗಕ್ಕೆ ನೇರವಾಗಿ) ಎರಡು ನಂದಿ ವಿಗ್ರಹಗಳು ಕಾಣಸಿಗುತ್ತವೆ. ಪುಟ್ಟ ಮಂಟಪದೊಳಗೆ ಕುಳಿತ ನಂದಿಯೊಂದಾದರೆ, ಅದರ ಹಿಂದೆ ನಿಂತಿರುವ ನಂದಿಯೊಂದು. ಪಶ್ಚಿಮಕ್ಕೆ ಮುಖ ಮಾಡಿರುವ ಈ ದೇಗುಲದ ಮುಖಮಂಟಪಕ್ಕೆ ನಾಲ್ಕು ಕಂಬಗಳಿವೆ.
ದೇಗುಲದ ಮುಖ್ಯದ್ವಾರದ ಎಡ ಭಾಗಕ್ಕೆ, ನಿಂತಿರುವ ಗಣಪನ ವಿಗ್ರಹವೊಂದು ಕಾಣಸಿಗುತ್ತದೆ. ದೇಗುಲದ ಹೊರಭಾಗದ ಸುತ್ತಲೂ, ಸುಬ್ರಮಣ್ಯ, ಕಾಳಿ, ಪಾರ್ವತಿ ಮುಂತಾದ ಮನಸೆಳೆವ ವಿಗ್ರಹಗಳಿವೆ.

ಈ ಊರಿನಲ್ಲಿ ನಡೆವ ದಸರೆಯಲ್ಲೊಂದು ವೈಶಿಷ್ಟ್ಯವಿದೆ.
ಉತ್ತರ ಭಾರತದಲ್ಲಿ, ಸಾಮಾನ್ಯವಾಗಿ ದಸರೆಯ ಸಮಯದಲ್ಲಿ ಕಾಣಸಿಗುವುದು ’ರಾಮ-ಲೀಲ’ ಉತ್ಸವ. ಈ ಉತ್ಸವದಲ್ಲಿ, ರಾವಣ-ಕುಂಭಕರ್ಣ-ಮೇಘನಾದರ ಬೊಂಬೆಗಳನ್ನು ಸುಡುವುದು ಸರ್ವೇ ಸಾಮಾನ್ಯ.
ಆದರೆ ಈ ಊರಿನಲ್ಲಿ ರಾವಣನನ್ನು ಸುಡುವುದಿಲ್ಲ. ಈ ಸ್ಥಳದಲ್ಲಿ ಬೈಜನಾಥನನ್ನು ಕುರಿತು ರಾವಣ ತಪಗೈದಿದ್ದನೆಂಬುದು ಇಲ್ಲಿಯವರ ನಂಬಿಕೆ. ಇಲ್ಲಿ ಕೂಡ ಕೆಲ ವರ್ಷಗಳ ಹಿಂದೆ ದಸರಾ ಸಮಯದಲ್ಲಿ, ಬೇರೆಡೆಯಂತೆ ದಸರೆಯ ಸಮಯದಲ್ಲಿ ರಾವಣನ ಬೊಂಬೆ ಸುಟ್ಟಾಗ ಉತ್ಸವ ನಡೆಸಿಕೊಟ್ಟವರಿಗೆ ಸಾವಾಯ್ತಂತೆ.
ಇದೇ ರೀತಿ, ಪ್ರತಿ ವರ್ಷವೂ ರಾವಣನನ್ನು ಸುಟ್ಟಾಗ, ಒಂದಿಲ್ಲೊಂದು ಕೆಡುಕಾಗಿ, ಕೊನೆಗೆ ರಾವಣನ ಸುಡುವ ಪ್ರತೀತಿಯನ್ನು ಈಗ ನಿಲ್ಲಿಸಿದ್ದಾರೆ.

ಒಟ್ಟಿನಲ್ಲಿ, ಬೆಟ್ಟದಿಂದ ಸುತ್ತುವರಿದ, ಸಿಂಧೂ ನದಿಯ ಉಪನದಿಯ ಉಪನದಿಯ ತಟದ ಈ ಬೈಜನಾಥ್, ಕುತೂಹಲಭರಿತ ಪ್ರೇಕ್ಷಣೀಯ ಸ್ಥಳ.

--ಶ್ರೀ

Wednesday, April 1, 2009

ಹಿಮಾಚಲ ಪರ್ಯಟನೆ - ಯಾಕೂ (ಝಾಕೂ) ದೇಗುಲ, ಶಿಮ್ಲಾ



ಶಿಮ್ಲಾ ನಗರದಲ್ಲಿನ ಪೂರ್ವಕ್ಕಿರುವ ಎತ್ತರದ ಬೆಟ್ಟ - ಝಾಕೂ(ಯಾಕೂ). ಸಮುದ್ರ ಮಟ್ಟದಿಂದ, ಸುಮಾರು ೮೫೦೦ ಅಡಿಗಳ ಮೇಲೆ ಇರುವ ಈ ಬೆಟ್ಟದ ಮೇಲೆ, ಹನುಮಂತನ ದೇಗುಲವೊಂದಿದೆ.
ಈ ದೇಗುಲವನ್ನು ತಲುಪಲು, ಬೆಟ್ಟದ ಬುಡದಿಂದ ೨ ಕಿ.ಮೀ. ಕಡಿದಾದ ದಾರಿ ಇದ್ದು, ಇದನ್ನು ಹತ್ತಿ ತಲುಪಬಹುದು ಇಲ್ಲವೇ ಬೆಟ್ಟಗಳನ್ನು ಸುಲುಭವಾಗಿ ಹತ್ತುವ(೪-wheel drive) ಕಾರಿನಲ್ಲಿ ತಲುಪಬಹುದು.

ಈ ಝಾಕು ಬೆಟ್ಟಕ್ಕೆ ಹನುಮಂತನು ಭೇಟಿ ಕೊಟ್ಟಿದ್ದನೆಂಬ ಪ್ರತೀತಿ. ಈ ದೇಗುಲದಲ್ಲಿ ಕೆಳಕಂಡ ಇತಿಹಾಸ(ನಂಬಿಕೆ)ಯನ್ನು ದಾಖಲಿಸಿದ್ದಾರೆ:

ರಾಮಾಯಣದಲ್ಲಿ, ಲಕ್ಷ್ಮಣನು ಇಂದ್ರಜಿತುವಿನ ಬಾಣದಿಂದ ಪ್ರಜ್ಞಾಹೀನನಾದಾಗ, ಹನುಮಂತನು ವಾನರ ಸಹಚರರೊಂದಿಗೆ ಹಿಮಾಲಯಕ್ಕೆ ಧಾವಿಸುತ್ತಾನೆ.
ಸಂಜೀವಿನಿಯನ್ನು ಹುಡುಕುತ್ತಾ ಹಿಮಾಲಯದಲ್ಲಿ ಸಂಚರಿಸುತ್ತಿರುವಾಗ, ಝಾಕೂ ಎಂಬ ಋಷಿಯು ಈ ಸ್ಥಳದಲ್ಲಿ ತಪಸ್ಸು ಮಾಡುತ್ತಿರುವುದು ಹನುಮನ ಕಣ್ಣಿಗೆ ಬೀಳುತ್ತದೆ.
ಆಗ ಹನುಮನು ಸಂಜೀವಿನಿ ಗಿಡಮೂಲಿಕೆಯ ಬಗ್ಗೆ ಹೆಚ್ಚು ತಿಳಿಯಲು, ಝಾಕೂ ಋಷಿಯ ಸಹಾಯವನ್ನು ಕೋರುತ್ತಾನೆ.
ಝಾಕೂ ಋಷಿಯು ಸಂಜೀವಿನಿ ಗಿಡಮೂಲಿಕೆಯ ಬಗ್ಗೆ ತಿಳಿಸಿ, ಅದು ದ್ರೋಣ ಪರ್ವತದಲ್ಲಿ ಸಿಗುವುದಾಗಿ ವಿವರಿಸುತ್ತಾನೆ.
’ಸಂಜೀವಿನಿ ಮೂಲಿಕೆ ಸಿಕ್ಕ ಮೇಲೆ, ಈ ಬೆಟ್ಟಕ್ಕೆ ಬಂದು, ತನ್ನನ್ನು ಭೇಟಿ ನೀಡಿ ಲಂಕೆಗೆ ಹೋಗು’ ಎಂದು ಹನುಮನ ಬಳಿ ವಚನ ತೆಗೆದುಕೊಳ್ಳುತ್ತಾನೆ.

ಹನುಮನು ದ್ರೋಣ ಪರ್ವತದ ಕಡೆಗೆ ಹೊರಡಲು ಅನುವಾದಾಗ, ತನ್ನ ಸಹಚರರು ನಿದ್ರೆಯಲ್ಲಿರುದುವುದನ್ನರಿತು, ಅವರನ್ನು ಅಲ್ಲೇ ಬಿಟ್ಟು ದ್ರೋಣ ಪರ್ವತಕ್ಕೆ ಹೊರಟು ಹೋಗುತ್ತಾನೆ.
ಹನುಮಂತನಿಗೆ ಸಂಜೀವಿನಿ ದೊರಕುವ ವೇಳೆಗೆ, ಹೆಚ್ಚು ಕಾಲ ಕಳೆದಿದ್ದು, ಹನುಮನು ಝಾಕೂ ಋಷಿಯನ್ನು ಭೇಟಿ ಮಾಡದೆ ಲಕ್ಷ್ಮಣನನ್ನು ಉಳಿಸಲು ಲಂಕೆಗೆ ಹೊರಡುತ್ತಾನೆ.
ಲಕ್ಷ್ಮಣನು ಲಂಕೆಯಲ್ಲಿ ಸಂಜೀವಿನಿ ಮೂಲಿಕೆಯಿಂದ ಚೇತರಿಸುಕೊಳ್ಳುತ್ತಾನೆ.

ಇತ್ತ, ಝಾಕೂ ಋಷಿಯು ಹನುಮನನ್ನು ಮರು ಕಾಣದೆ ಚಡಪಡಿಸುತ್ತಿರುತ್ತಾನೆ. ಹನುಮನು ತನ್ನ ಮಾತನ್ನು ಉಳಿಸಿಕೊಳ್ಳಲು, ಮತ್ತೆ ಝಾಕೂ ಋಷಿಯನ್ನು ಭೇಟಿ ಮಾಡುತ್ತಾನೆ.
ಝಾಕೂ ಋಷಿಗೆ ಸಂಜೀವಿನಿ ದೊರಕಿದ ವಿವರವನ್ನು ತಿಳಿಸಿ, ಹೆಚ್ಚು ಕಾಲವಿಲ್ಲದ್ದರಿಂದ ಲಂಕೆಗೆ ತಮ್ಮನ್ನು ಭೇಟಿ ಮಾಡದೆ ಹಾಗೆ ಹೊರಟು ಹೋಗಬೇಕಾಯಿತೆಂದು ಅರಿಕೆ ಮಾಡಿಕೊಳ್ಳುತ್ತಾನೆ.
ಈ ಸ್ಥಳದಿಂದ ಹನುಮನು ಹೊರಟ ಮೇಲೆ, ಇಲ್ಲಿ ಹನುಮನ ಒಂದು ಉದ್ಭವ ಮೂರ್ತಿ ಕಾಣಿಸುಕೊಳ್ಳುತ್ತದೆ.

ಹನುಮಂತನ ನೆನಪಿಗಾಗಿ ಝಾಕು ಋಷಿ ಈ ಮಂದಿರವನ್ನು ಕಟ್ಟಿದ್ದರೆಂದು ಪ್ರತೀತಿ.
ಅಂದಿನಿಂದ ಈ ಮೂರ್ತಿಯನ್ನೇ ಇಲ್ಲಿ ಪೂಜಿಸುತ್ತಿದ್ದಾರಂತೆ...ಹನುಮನ ಸಹಚರರು ಅಂದಿನಿಂದ ಇಂದಿನವರೆಗೂ ಇಲ್ಲೇ ಇದ್ದಾರೆಂದು, ಹಾಗಾಗಿ ಈ ಸ್ಥಳದಲ್ಲಿ ಕೋತಿಗಳ ಸಂಖ್ಯೆ ಹೆಚ್ಚು ಎಂಬ ನಂಬಿಕೆ.

ಈ ದೇಗುಲದ ಪರಿಸರ ರಮ್ಯವಾಗಿದ್ದು, ದೇವದಾರು, ಪೈನ್ ಮರಗಳ ಮಧ್ಯೆ ಈ ಮಂದಿರವಿದೆ.
ಇಲ್ಲಿಂದ, ಶಿಮ್ಲಾ ನಗರದ ಮನಮೋಹಕ ದೃಶ್ಯ ಕಾಣ ಸಿಗುತ್ತದೆ.
ಇಲ್ಲಿನ ಕೋತಿಗಳು, ಪ್ರವಾಸಿಗರ ಜೇಬುಗಳನ್ನು ಆಹಾರಕ್ಕಾಗಿ ಪರೀಕ್ಷಿಸುತ್ತದೆಂದೂ, ಬ್ಯಾಗ್‍ಗಳನ್ನು ಕಸಿಯುತ್ತದೆಂದೂ ಕುಪ್ರಸಿದ್ಧಿ ಪಡೆದಿವೆ.
ಹಲವಾರು ಮಂದಿ, ಕೋತಿಗಳನ್ನು ಓಡಿಸಲು ದೊಣ್ಣೆಗಳನ್ನು ಬಳಸುತ್ತಿದ್ದುದೂ, ಕೋತಿಗಳು ಪ್ರವಾಸಿಗರ ಚಪ್ಪಲಿಗಳನ್ನು ಎತ್ತೊಯ್ದದ್ದೂ ಕಣ್ಣಾರೆ ಕಂಡೆವು.
ಇಲ್ಲಿಗೆ ಭೇಟಿ ನೀಡುವವರು ತುಸು ಎಚ್ಚರಿಕೆಯಿಂದಿದ್ದರೆ ಒಳಿತು...
ರಾಮ ಜಪದ ಮಹಿಮೆಯೋ / ನಮ್ಮ ಅದೃಷ್ಟವೋ ನಮ್ಮ ಸುತ್ತ-ಮುತ್ತ ಹತ್ತು-ಹಲವಾರು ಕೋತಿಗಳು ಬೇರೆಯವರನ್ನು ದಾಳಿ ಮಾಡಿದರೂ ಒಂದೂ ನಮ್ಮ ತಂಟೆಗೆ ಬರಲಿಲ್ಲ... :)

--ಶ್ರೀ